ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.3. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಭಾರತೀಯ ಸೇನೆಯ ವಾಹನಗಳ ಸಾಲಿನ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕಾಜಿಗುಂದ್ ಪ್ರದೇಶದ ಲೋವರ್ ಮುಂಡಾ ಎಂಬಲ್ಲಿ ಶನಿವಾರ ಬೆಳಿಗ್ಗೆ 11:15ರ ಸುಮಾರಿಗೆ ಈ ದಾಳಿ ನಡೆದಿದೆ.

ಸೇನೆಯ ವಾಹನಗಳ ಸಾಲಿನಲ್ಲಿ ಸಾಗುತ್ತಿದ್ದ ವಾಹನವೊಂದರ ಮೇಲೆ ಭಯೋತ್ಪಾ ದಕರು ಎಕೆ ರೈಫಲ್‌ಗಳಿಂದ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಗೊಂಡಿದ್ದ ಆರು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಕೊನೆಯುಸಿರೆಳೆದಿದ್ದಾರೆ ಎಂದು ಇಲ್ಲಿ ಸೇನಾಧಿಕಾರಿಯೋರ್ವರು ತಿಳಿಸಿದರು. ದಾಳಿಕೋರರಿಗಾಗಿ ಪೊಲೀಸರು, ಅರೆ ಸೇನಾಪಡೆಗಳು ಮತ್ತು ಸೇನೆ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ದಾಳಿಯ ನಂತರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ.

ದ.ಕಾಶ್ಮೀರದಲ್ಲಿ ಲಷ್ಕರ್-ಎ-ತೈಬಾ ಮತ್ತು ಹಿಝ್ಬುಲ್ ಮುಜಾಹಿದೀನ್ ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿದ್ದು, ಈ ಪೈಕಿ ಯಾವುದೋ ಗುಂಪು ಈ ದಾಳಿಯನ್ನು ನಡೆಸಿದೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.

error: Content is protected !!
Scroll to Top