ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಮುಖ್ಯಮಂತ್ರಿಯಿಂದ ಭೂಮಿ ಪೂಜೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂನ್ 27, ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಭೂಮಿ ಪೂಜೆ ನೆರವೇರಿಸಿದ್ದಾರೆ.

ಬಳಿಕ ಮಾತನಾಡಿದ ಅವರು ಬೆಂಗಳೂರನ್ನು ಯೋಜನಾ ಬದ್ಧವಾಗಿ ಬೆಳೆಸಲು ಕೆಂಪೇಗೌಡರ ಕೊಡುಗೆ ಅಪಾರ. ನದಿ ಮೂಲಗಳಿಲ್ಲದ ಬೆಂಗಳೂರಿನಲ್ಲಿ ನೂರಾರು ಕೆರೆಗಳ ನಿರ್ಮಾಣ ಮಾಡಿದರು, ಬೆಂಗಳೂರು ನಗರವನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಿಸಿದ್ದಾರೆ ಎಂದರು.

ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸರ್ಕಾರ ಶ್ರಮಿಸುತ್ತಿದೆ, ಮುಂದಿನ ಒಂದು ವರ್ಷದಲ್ಲಿ 108 ಅಡಿಯ ಪ್ರತಿಮೆ ನಿರ್ಮಿಸಿ ಅದರ ಉದ್ಘಾಟನೆಗೆ ಎಲ್ಲರನ್ನೂ ಕರೆಯೋಣ ಜೊತೆಗೆ ಎಲ್ಲರೂ ಸೇರೋಣ ಎಂದು ಹೇಳಿದರು. ಜೊತೆಗೆ ಇಂದು 23 ಎಕರೆ ವಿಸ್ತೀರ್ಣದಲ್ಲಿ ಸೆಂಟ್ರಲ್ ಪಾರ್ಕ್ ಕಾಮಗಾರಿಗೂ ಚಾಲನೆ ದೊರೆತಿದೆ. ಭೂಮಿಪೂಜೆ ನೆರೆವೇರಿದ ಒಂದೇ ವರ್ಷದಲ್ಲಿ ಇಡೀ ಕಾಮಗಾರಿಯನ್ನು ಮುಗಿಸಿ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಗುವುದು. ಈ ಯೋಜನೆಗೆ ಒಟ್ಟು 78 ಕೋಟಿ ರೂಪಾಯಿ ವೆಚ್ಚವಾಗುತ್ತಿದ್ದು, ಯೋಜನೆ ಪೂರ್ಣಗೊಂಡ ಬಳಿಕ ಕೆಂಪೇಗೌಡ ವಿಮಾನ ನಿಲ್ದಾಣ ಪ್ರಾಧಿಕಾರದವರೇ ನಿರ್ವಹಣೆ ಮಾಡಲಿದ್ದಾರೆ.

ಇಂದಿನ ಕಾರ್ಯಕ್ರಮದಲ್ಲಿ ಸಚಿವರಾದ ಗೋಪಾಲಯ್ಯ, ಬೈರತಿ ಬಸವರಾಜು, ಸಂಸದ ಬಚ್ಚೇಗೌಡ, ಶಾಸಕ ಶರತ್ ಬಚ್ಚೇಗೌಡ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ಸುರೇಶ್ ಅಂಗಡಿ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group