ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 22: ವಿಶ್ವ ವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಭರಣಗಳ ಅವ್ಯವಹಾರ ನಡೆಸಿರುವ ಆರೋಪವು ದೇವಸ್ಥಾನದ ಆಡಳಿತ ಮಂಡಳಿಯ ಮೇಲೆಯೇ ಕೇಳಿಬಂದಿದ್ದು, ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ ಹಾಗೂ ದೇಗುಲದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರ ಮೇಲೆ ಸುಬ್ರಹ್ಮಣ್ಯದ ನಿವಾಸಿ ಶ್ರೀನಾಥ್ ಟಿ.ಎಸ್. ಅವರು ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೋಲಿಸ್ ಅಧೀಕ್ಷಕರಿಗೆ ದೂರು ದಾಖಲಿಸಿ, ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.

 


ಕರ್ನಾಟಕ ರಾಜ್ಯ ಸರಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಡಳಿತದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕೃತ ದಾಖಲಾತಿ ಪುಸ್ತಕದಲ್ಲಿ ದಾಖಲಿಸಿರುವ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ವಜ್ರದ ಕಂಠಿಹಾರ, ಆಭರಣಗಳು, ಶ್ರೀ ಸತ್ಯನಾರಾಯಣ ದೇವರ ಫೋಟೋ , ಶ್ರೀ ಕುಕ್ಕೆ ಲಿಂಗ ದೇವಳದ ಬಳಿ ಇದ್ದ ಬೆಳ್ಳಿಯ ಒಡವೆಗಳು, ಪುರಾತನ ಕಾಲದ ವಿಗ್ರಹಗಳು ಕಾಣೆಯಾಗಿದ್ದು, ಈ ಬಗ್ಗೆ ದೇವಾಲಯದ ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೋನಪ್ಪ ಮಾನಾಡು ಎಂಬವರು ಕಳೆದ ಅಕ್ಟೋಬರ್ 22 ರಂದು ದೇವಾಲಯದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರಿಗೆ ಮಾಹಿತಿಯನ್ನು ಕೋರಿ ಅರ್ಜಿ ಸಲ್ಲಿಸಿದ್ದರಾದರೂ, ಈ ಬಗ್ಗೆ ಯಾವುದೇ ಮಾಹಿತಿಯನ್ನು ಆಡಳಿತ ವರ್ಗ ನೀಡಿಲ್ಲ ಎಂದು ಹೇಳಲಾಗಿದೆ.

Also Read  ಡಿ.ಕೆ.ಶಿವಕುಮಾರ್ 'ಮುಖ್ಯಮಂತ್ರಿ'ಯಾಗಲು ಹೈಕಮಾಂಡ್ ಒಪ್ಪಲ್ಲ  - ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!!

ಇದಕ್ಕೆ ಸಂಬಂಧಿಸಿದಂತೆ 01/08/2020 ರಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯ ನಿರ್ದೇಶಕರಾಗಿರುವ ಶ್ರೀನಾಥ್ ಟಿ.ಎಸ್ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರೂ ಇಲ್ಲಿಯವರೆಗೂ ಆಡಳಿತಾಧಿಕಾರಿಯಾಗಲಿ, ಕಾರ್ಯ ನಿರ್ವಹಣಾಧಿಕಾರಿಯೇ ಆಗಲಿ ಯಾವುದೇ ಮಾಹಿತಿ ನೀಡಿಲ್ಲ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಆಗ್ರಹಿಸಿದ್ದಾರೆ.

Also Read  ಉಗ್ರ ಪರ ಗೋಡೆ ಬರಹ ಪ್ರಕರಣ ➤ N.I.A ತನಿಖೆಗೆ ಒತ್ತಾಯಿಸಿ ವಿಎಚ್ ಪಿ ಕಾರ್ಯಕರ್ತರ ಪ್ರತಿಭಟನೆ

 

 

error: Content is protected !!
Scroll to Top