ಹಿಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಪ್ರಸ್ತುತ ಸಾಲಿನ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಮುಂದಿನ ಎರಡು ವಾರಗಳ ಕಾಲಾವಧಿಯಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್‍ನ್ನು ಅಭಿವೃದ್ಧಿ ಪಡಿಸಲಾಗಿದೆ.ಜಿಲ್ಲೆಯ ರೈತರು ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿರುವ  ಆ್ಯಪ್ಅನ್ನು ಡೌನ್‍ಲೋಡ್ ಮಾಡಿ ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು. ನಂತರ ಆಧಾರ್ ಕ್ಯೂ ಆರ್ ಕೋಡ್‍ನ್ನು ಸ್ಕ್ಯಾನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ. ಬರಲಿದ್ದು, ಓ.ಟಿ.ಪಿ.ಯನ್ನು ದಾಖಲಿಸಿ ಸಲ್ಲಿಸಬೇಕು. ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ಸಂಖ್ಯೆ, ಹಿಸ್ಸಾ, ಮಾಲೀಕರ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ ಸರ್ವೆ ನಂಬರ್‍ಗಳಡಿ ರೇಖೆ ಗಡಿಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೊ ತೆಗೆದು ಮಾಹಿತಿಯನ್ನು ಅಪ್‍ಲೋಡ್ ಮಾಡಬೇಕು.

Also Read  6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ

ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುತ್ತದೆ. ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಸುವರ್ಣಾವಕಾಶವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆಪ್‍ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‍ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಹಿಂಗಾರು ಬೆಳೆ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳು /ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಹಾಗೂ ತೋಟಗಾರಿಕಾ ಇಲಾಖೆಯ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ

error: Content is protected !!
Scroll to Top