ಜ.7ರಂದು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾದ ಹಿನ್ನೆಲೆ ರಾಜ್ಯದ ವಿವಿಧೆಡೆ ತುಂತುರು ಮಳೆಯಾಗುತ್ತಿದ್ದು , ಜ.9ರ ವರೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜ. 7ಕ್ಕೆ 64.5 ಮಿ.ಮೀನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ಘೋಷಿಸಲಾಗಿದೆ. ಸೋಮವಾರದ ವರದಿಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 5ಸೆಂ.ಮೀ. ಅತೀ ಹೆಚ್ಚು ಮಳೆಯಾಗಿದೆ. ಉಳಿದಂತೆ ಶಿವಮೊಗ್ಗ, ಕೊಡಗಿನ ಭಾಗಮಮಂಡಲ ತಲಾ 3 ಸೆಂ.ಮೀ, ದಕ್ಷಿಣ ಕನ್ನಡದ ಸುಳ್ಯ, ಶಿವಮೊಗ್ಗದ ಭದ್ರಾವತಿ, ಚಿಕ್ಕಮಗಳೂರಿನ ಲಕ್ಕವಳ್ಳಿ ತಲಾ 2 ಸೆಂ.ಮೀ ಮಳೆಯಾಗಿದೆ. ರಾಜ್ಯದ ಕನಿಷ್ಠ ತಾಪಮಾನ ಹಾಸನದಲ್ಲಿ 11.6, ಬೀದರ್‌ನಲ್ಲಿ 12.6 ಹಾಗೂ ಗರಿಷ್ಠ ತಾಪಮಾನ ಕಾರವಾರದಲ್ಲಿ 35.8 ಡಿಗ್ರಿ ಸೇಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ವರದಿ ತಿಳಿಸಿದೆ.

Scroll to Top