ಕಡಬ: ಅನಾರೋಗ್ಯ ಪೀಡಿತ ವೃದ್ದೆಯನ್ನು ಮರದ ಬಡಿಗೆಗೆ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಕ್ಕಳು

(ನ್ಯೂಸ್ ಕಡಬ) newskadaba.com ಕಡಬ, ಆ. 20. ನಿತ್ಯ ಕಾಡಾನೆ ಅಲೆದಾಡುವ ಈ ಪ್ರದೇಶದಲ್ಲಿ ರಸ್ತೆ ಸಂರ್ಪಕವಿಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾದ ವೃದ್ದ ಮಹಿಳೆಯೊಬ್ಬರನ್ನು ಎರಡು ಕಿ.ಮೀ ದೂರದ ಮುಖ್ಯರಸ್ತೆಯವರೆಗೆ ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಘಟನೆ ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ಕಲ್ಲುಗುಡ್ಡೆ ಸಮೀಪದ ಬಳ್ಳಕ ಎಂಬಲ್ಲಿ ಆ.19ರಂದು ನಡೆದಿದೆ.

 

ಎಪ್ಪತ್ತು ವರ್ಷದ ಮಹಿಳೆಯೊಬ್ಬರು ಕಾಲು ನೋವಿನಿಂದ ನರಳುತ್ತಿದ್ದ ಹಿನ್ನೆಲೆ ಎಂಜೀರ ಮೂಲಕ ಉಪ್ಪಿನಂಗಡಿಗೆ ತುರ್ತಾಗಿ ಕರೆದೊಯ್ಯಬೇಕಿತ್ತು. ಆದರೆ ರಸ್ತೆ ಇದ್ದರೂ ಅಭಿವೃದ್ದಿ ಕಾರಣ ಹಿನ್ನೆಲೆ ವಾಹನ ಓಡಾಟ ಕಷ್ಟಕರವಾಗಿತ್ತು. ಹೀಗಾಗಿ ಕುಟುಂಬಸ್ಥರು ಮರದ ಬಡಿಗೆಗೆ ಬಟ್ಟೆಯೊಂದನ್ನು ಕಟ್ಟಿ ಅದರಲ್ಲಿ ಮಹಿಳೆಯನ್ನು ಕುಳ್ಳಿರಿಸಿ ಎಂಜೀರ ಮುಖ್ಯ ರಸ್ತೆಗೆ ತಲುಪಿಸಿದ್ದಾರೆ ಎನ್ನಲಾಗಿದೆ. ವೃದ್ದ ಮಹಿಳೆಯನ್ನು ಹೊತ್ತುಕೊಂಡು ಹೋಗುತ್ತಿರುವ ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನೂಜಿಬಾಳ್ತಿಲ-ಕೊಣಾಜೆ ಗ್ರಾಮವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ಈ ಭಾಗದ ಜನರಿಗೆ ಎಂಜೀರ ಹತ್ತಿರದ ಪೇಟೆಯಾಗಿದೆ. ಇತ್ತೀಚೆಗೆ ಸುರಿದ ಮಹಾಮಳೆಗೆ ಈ ರಸ್ತೆ ಕೆಸರುಮಯವಾದ ಕಾರಣ ಈ ಭಾಗದ ಜನ ತಮ್ಮ ವಾಹನಗಳನ್ನು ಅರ್ಧ ದಾರಿಯಲ್ಲೇ ನಿಲ್ಲಿಸಿ ಕಿ.ಮೀ ಗಟ್ಟಲೆ ನಡೆದುಕೊಂಡು ಹೋಗಿ ಮನೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿತ್ತು.

Scroll to Top