ಪರಮೇಶ್ ಮೇಸ್ತ ಪ್ರಕರಣದ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ► ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಐಜಿಪಿ ನಿಂಬಾಲ್ಕರ್

(ನ್ಯೂಸ್ ಕಡಬ) newskadaba.com ಹೊನ್ನಾವರ, ಡಿ.11. ಪರೇಶ್ ಮೇಸ್ತ ಸಾವು ಪ್ರಕರಣದ ಬಗ್ಗೆ ಪಕ್ಷವೊಂದು ನೀಡಿದ್ದ ಪತ್ರಿಕಾ ಪ್ರಕಟಣೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳು ವೈಯಕ್ತಿಕ ಹಿತಾಸಕ್ತಿಗಾಗಿ ಅಮಾಯಕ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ತಂತ್ರವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ.

ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಧರ್ಮದ ಆಧಾರಲ್ಲಿ ಸಮಾಜವನ್ನು ಒಡೆಯುವ ಹಾಗೂ ಕೋಮುಭಾವನೆಯನ್ನು ಕೆರಳಿಸಲು ನಡೆಸಿದ ಷಡ್ಯಂತ್ರವು ಈ ವದಂತಿಗಳ ಹಿಂದೆ ಅಡಗಿದೆ. ಪರಮೇಶ ಮೇಸ್ತ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರ ವರದಿ ಸಾಮಾಜಿಕ ಜಾಲತಾಣದಲ್ಲಿ ಹಾಗು ಪತ್ರಿಕಾ ಪ್ರಕಟನೆಯಲ್ಲಿರುವ ಆರೋಪಗಳನ್ನು ಅಪ್ಪಟ ಸುಳ್ಳು ಎಂದು ಸಾಬೀತುಪಡಿಸಿದೆ ಎಂದವರು ತಿಳಿಸಿದ್ದಾರೆ.

ಹೊನ್ನಾವರದಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದವರು ಹಾಗು ಕುಮಟಾದಲ್ಲಿ ಇಂದು ಸಿಬ್ಬಂದಿಯೊಬ್ಬರ ಮೇಲೆ ನಡೆದ ಹಲ್ಲೆಯ ಹಿಂದಿರುವವರ ವಿರುದ್ಧ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ರವಾನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಿಂಬಾಳ್ಕರ್ ಎಚ್ಚರಿಸಿದ್ದಾರೆ.

Scroll to Top