ವಾಮಂಜೂರು – ಪಿಲಿಕುಳ ಚತುಷ್ಪಥ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ ► ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಸುಮಾರು 4.95 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಮಂಜೂರು ಜಂಕ್ಷನ್‌ನಿಂದ ಪಿಲಿಕುಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಂಕ್ರಿಟೀಕರಣ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಧ್ವಜವನ್ನು ಪ್ರದರ್ಶಿಸಿದ ಘಟನೆ ಗುರುವಾರದಂದು ನಡೆದಿದೆ.

ಸ್ಥಳೀಯ ಕಾರ್ಪೊರೇಟರ್ ಮತ್ತು ಗ್ರಾಪಂ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲು ಆಗಮಿಸಿದ್ದ ಸಾಂಖ್ಯಿಕ, ವಿಜ್ಞಾನ, ತಂತ್ರಜ್ಞಾನ ಸಚಿವ ಸಚಿವ ಎಂ.ಆರ್. ಸೀತಾರಾಮ್ ಹಾಗೂ ಸ್ಥಳದಲ್ಲಿದ್ದ ಶಾಸಕರಾದ ಜೆ.ಆರ್.ಲೋಬೊ, ಬಿ.ಎ.ಮೊಯ್ದಿನ್ ಬಾವಾ, ಮೇಯರ್ ಕವಿತಾ ಸನಿಲ್, ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಜಿಪಂ ಸದಸ್ಯ ಇಬ್ರಾಹೀಂ ಅಡ್ಡೂರು, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ. ಸುಧೀರ್, ಬಜ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಶಾಹುಲ್ ಹಮೀದ್ ಮತ್ತಿತರರಿಗೆ ಕಪ್ಪು ಬಾವುಟ ಪ್ರದರ್ಶಿಸಿದರು. ತಕ್ಷಣ ಪೊಲೀಸರು ಮಧ್ಯೆ ಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದರು.

Scroll to Top