ಓದುವ ಮೂಲಕ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ➤ ಡಾ| ಎಂ.ಬಿ.ಪುರಾಣಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ನಿರಂತರವಾಗಿ ಪುಸ್ತಕವನ್ನು ಓದುವುದರಿಂದ ಜ್ಞಾನವನ್ನು ಸಂಪಾದಿಸಬಹುದು, ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬಹುದು. ವಿದ್ಯಾರ್ಥಿದೆಸೆಯಿಂದಲೇ ಈ ಹವ್ಯಾಸ ಆರಂಭವಾದರೆ ಅದರ ಪೂರ್ಣ ಪ್ರಯೋಜನ ವಿದ್ಯಾರ್ಥಿಗಳಿಗೆ ದೊರೆಯುತ್ತದೆ ಎಂದು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ ಬಿ. ಪುರಾಣಿಕ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು ಆಶ್ರಯದಲ್ಲಿ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆದ ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಉತ್ತರ ವಲಯ ಶ್ರೀ ಸದಾನಂದ ಪೂಂಜ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ದಕ್ಷಿಣ ವಲಯ ಎಚ್. ಆರ್.ಈಶ್ವರ ಅವರು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಪುಸ್ತಕ ದಾನಿಗಳಾದ ಬಿ. ಆರ್. ನರಸಿಂಹರಾವ್ ಕಲ್ಸಂಕ ಉಡುಪಿ ಅವರು 50 ಶಾಲೆಗಳಿಗೆ ಪುಸ್ತಕವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಓದಿನ ಹವ್ಯಾಸಕ್ಕೆ ಪ್ರೇರಣೆ ಒದಗಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂಪಿ ಶ್ರೀನಾಥ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ಮಾಡುವುದರೊಂದಿಗೆ ಗ್ರಂಥಾಲಯ ಪುಸ್ತಕ ವಿತರಣೆ ಕಾರ್ಯಕ್ರಮದಿಂದ ಓದುವ ಹವ್ಯಾಸಕ್ಕೆ ಹೊಸ ಬಲ ತುಂಬಿದಂತೆ ಆಗುತ್ತದೆ ಎಂದರು. ವೇದಿಕೆಯಲ್ಲಿ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಂಜುನಾಥ ಎಸ್ ರೇವಣಕರ್ ಉಪಸ್ಥಿತರಿದ್ದರು. ಮಂಗಳೂರು ವಿ.ವಿ.ಯಿಂದ ಇತ್ತೀಚೆಗೆ ಡಾಕ್ಟರೇಟ್ ಪದವಿಯನ್ನು ಪಡೆದ ಪ್ರೊ.ಎಂ.ಬಿ. ಪುರಾಣಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಹ ಕಾರ್ಯದರ್ಶಿಗಳಾದ ಯು.ಎಚ್.ಖಾಲಿದ್ ಉಜಿರೆ, ಕಿರಣ್ ಪ್ರಸಾದ ರೈ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಶ್ರೀಮತಿ ಅರುಣಾ ನಾಗರಾಜ್, ಶ್ರೀಮತಿ ರತ್ನಾವತಿ ಜೆ.ಬೈಕಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀಮತಿ ರಾಜೇಶ್ವರಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ವಿನಯ್ ಆಚಾರ್ಯ ಎಚ್ ವಂದಿಸಿದರು. ಶಾರದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಯಶೋಧ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top