ಕರಾವಳಿಯಲ್ಲಿ ಭಾರೀ ಗಾಳಿ – ಮಳೆಯಾಗುತ್ತಿರುವ ಹಿನ್ನೆಲೆ | ತುರ್ತು ಕ್ರಮಗಳಿಗಾಗಿ ಈ ಕ್ರಮಗಳನ್ನು ಅನುಸರಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ಕಳೆದೆರಡು ದಿನಗಳಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಹಲವು ತೊಂದರೆಗಳನ್ನು ಅನುಭವಿಸುವಂತಾಗಿದೆ.

ಮಳೆ ಹಾನಿ ಹಾಗೂ ತೊಂದರೆಗಳು ಉಂಟಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಈ ಕೆಳಗಿನಂತಿವೆ. ಗ್ರಾಮೀಣ ಅಥವಾ ದೂರ ಪ್ರದೇಶಗಳಿಂದ ತೆರಳುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭಗಳಲ್ಲಿ ಆನ್‍ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಿಸಿದ ವಿದ್ಯಾಸಂಸ್ಥೆಗಳು ಅವಕಾಶ ಕಲ್ಪಿಸಬಹುದಾಗಿದೆ.

ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯವನ್ನು ಕೈಗೊಳ್ಳಬೇಕು. ಜೊತೆಗೆ ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

Also Read  ಈ6 ರಾಶಿಯವರಿಗೆ ಧನಪ್ರಾಪ್ತಿ ಯೋಗ ಐಶ್ವರ್ಯ ಅಭಿವೃದ್ಧಿಯಾಗುತ್ತದೆ

ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಅಥವಾ ದೂರವಾಣಿ ಸಂಖ್ಯೆ 0824 – 2442590‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top