ಪಿಂಚಣಿ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ- ರಾಜರಾಜೇಶ್ವರಿ

(ನ್ಯೂಸ್ ಕಡಬ) newskadaba.com ಮಂಗಳೂರು,  ಜು. 12. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪಿಂಚಣಿದಾರರ ಕುಂದುಕೊರತೆ ಮತ್ತು ಅಹವಾಲುಗಳ ಸಭೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ನಡೆಯಿತು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಅದಾಲತ್‍ನಲ್ಲಿ 50ಕ್ಕೂ ಹೆಚ್ಚಿನ ಪಿಂಚಣಿದಾರರು ಭಾಗವಹಿಸಿದ್ದರು. ಜಿಲ್ಲೆಯ ಹಲವು ಪಿಂಚಣಿದಾರರು ಲಿಖಿತವಾಗಿ ಸಮಸ್ಯೆಗಳನ್ನು ತಿಳಿಸಿದರು. ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಡೆಪ್ಯುಟಿ ಅಕೌಂಟೆಂಟ್ ಜನರಲ್ ಆರ್. ರಾಜರಾಜೇಶ್ವರಿ ಅವರು ಮಾತನಾಡಿ, ಪಿಂಚಣಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಕಾಯುವ ಬದಲು ನೇರವಾಗಿ ತಮಗೆ ದೂರವಾಣಿ ಕರೆ ಮಾಡುವ ಮೂಲಕ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳುವಂತೆ ತಿಳಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕವೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಿಂಚಣಿ ಅದಾಲತ್ ನಡೆಸಿ ಪಿಂಚಣಿದಾರರ ಸಮಸ್ಯೆ ಬಗೆಹರಿಸಲು ಯತ್ನಿಸಲಾಗುತ್ತಿದೆ ಎಂದವರು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಿಂಚಣಿದಾರರ ಸಮಸ್ಯೆಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಳಿಸಿಕೊಂಡರು. ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಜಂಟಿ ನಿರ್ದೇಶಕಿ ಆರ್. ಮಾಲವಿಕ ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group