ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಆಗಸ್ಟ್ 15 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿರುವ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯವಿರುವ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಳ್ಳಬೇಕು, ಅದರಲ್ಲಿ  ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ, ಜಿಲ್ಲಾಡಳಿತಕ್ಕೆ ಮುಜುಗರ ಉಂಟಾಗದಂತೆ ಎಚ್ಚರಿಕಾ ಕ್ರಮವನ್ನು ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ತಿಳಿಸಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ದತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ವರ್ಷದಂತೆ ಈ ಬಾರಿಯು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಸ್ವಾತಂತ್ರ್ಯ ದಿನಾಚರಣೆಗೆ ಆಮಂತ್ರಣ ಪತ್ರಿಕೆಗಳ ಮುದ್ರಣ, ವಿತರಣೆ, ಬಂದ ಅತಿಥಿಗಳಿಗೆ  ಶಿಷ್ಟಾಚಾರದಂತೆ ಆಸನಗಳ ವ್ಯವಸ್ಥೆ, ನೆಹರೂ ಮೈದಾನದಲ್ಲಿ ವೇದಿಕೆ ಸಿದ್ಧಗೊಳಿಸುವುದು, ಬ್ಯಾಕ್ ಡ್ರಾಪ್, ಹೂಕುಂಡಗಳ ವ್ಯವಸ್ಥೆ, ಭದ್ರತೆಗೆ ಮೆಟಲ್ ಡಿಟೆಕ್ಟರ್, 3 ದಿನ ತಾಲೀಮು ನಡೆಸುವ ಪೊಲೀಸ್ ಮತ್ತು ವಿದ್ಯಾರ್ಥಿಗಳಿಗೆ ಲಘು ಉಪಹಾರದ ವ್ಯವಸ್ಥೆ, ಕಾರ್ಯಕ್ರಮದ ದಿನದಂದು ಸಿಹಿ ವಿತರಣೆ ಮತ್ತು ಬೆಳಗಿನ ಉಪಹಾರ ಪೂರೈಕೆ, ಕುಡಿಯುವ ನೀರಿನ ಪೂರೈಕೆ, ಕ್ರೀಡಾಂಗಣದ ಸ್ಪಚ್ಚತೆ, ಜಿಲ್ಲಾ ಉಸ್ತುವಾರಿ ಸಚಿವರ ಪಥ ಸಂಚಲನಕ್ಕೆ ತೆರೆದ ವಾಹನದ ವ್ಯವಸ್ಥೆ ಸೇರಿದಂತೆ ಇತ್ಯಾದಿಗಳನ್ನು ಕಾರ್ಯಕ್ರಮದ ಶಿಷ್ಟಾಚಾರದಂತೆ ಕೈಗೊಳ್ಳಬೇಕಾದಾಗ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ನಿರ್ದೇಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶವನ್ನು ನೀಡುವರು. ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿರುವಂತೆ ತಿಳಿಸಿದರು. ಮಂಗಳೂರು ಸಶಸ್ತ್ರ ಮೀಸಲು ಪಡೆಯ ಉಪ ಪೊಲೀಸ್ ಆಯುಕ್ತ ಪಿ. ಉಮೇಶ್ ವೇದಿಕೆಯಲ್ಲಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷಿ ಇಲಾಖೆ, ತೋಟಗಾರಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group