ಶೀಘ್ರದಲ್ಲೇ ಮಂಗಳೂರು- ಬೆಂಗಳೂರು ವಂದೇ ಭಾರತ್ ರೈಲು ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 08. ಮಂಗಳೂರು – ಬೆಂಗಳೂರು ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡ ತಕ್ಷಣವೇ ವಂದೇ ಭಾರತ್‌ ರೈಲು ಸಂಚಾರ ಆರಂಭವಾಗಲಿದೆ. ಅಲ್ಲದೇ ಮಂಗಳೂರು- ಗೋವಾ ನಡುವೆ ವಂದೇ ಭಾರತ್‌ ರೈಲು ಆರಂಭಿಸಲು ರೈಲ್ವೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ. ಅಮೃತ್‌ ಭಾರತ್‌ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರಕಾರ ದೇಶದಾದ್ಯಂತ 508 ರೈಲು ನಿಲ್ದಾಣಗಳನ್ನು ಮರು ಅಭಿವೃದ್ಧಿಗೊಳಿಸುತ್ತಿದ್ದು, ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿದರು.

ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣವು ಸುಮಾರು 19.32 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣಗೊಳ್ಳಲಿದ್ದು, ಒಂದು ವರ್ಷದ ಒಳಗೆ ಕಾಮಗಾರಿ ಪೂರ್ಣಗೊಳಿಸಲು ಅವಧಿ ನಿಗದಿಪಡಿಸಲಾಗಿದೆ ಎಂದು ಹೇಳಿದರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸುಮಾರು 50 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ. ಪಡೀಲ್‌ ಅಂಡರ್‌ ಪಾಸ್‌, ಜೆಪ್ಪು ಕುಡುಪಾಡಿ, ಮಹಾಕಾಳಿಪಡ್ಪು ಅಂಡರ್‌ ಪಾಸ್‌, ಜಿಲ್ಲೆಯಾದ್ಯಂತ 5 ಮೇಲ್ಸೇತುವೆ, 9 ಕೆಳಸೇತುವೆ, 4 ಪಾದಚಾರಿ ಸೇತುವೆ, 5 ಎಸ್ಕಲೇಟರ್‌ ನಿರ್ಮಾಣ ಸೇರಿದಂತೆ ರೈಲ್ವೇ ಅಭಿವೃದ್ಧಿಗೆ 2023 ಕೋಟಿ ರೂ. ಅನುದಾನ ಬಂದಿದೆ ಎಂದರು.

2023-24ರ ಬಜೆಟ್‌ ಘೋಷಣೆಯಂತೆ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣ, ಸೆಂಟ್ರಲ್‌ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್‌ ಭಾರತ್‌ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಮಾಡಲಾಗುವುದೆಂದು ಘೋಷಿಸಲಾಗಿತ್ತು. ಇತರ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದು ನಳಿನ್‌ ಹೇಳಿದರು.

error: Content is protected !!

Join the Group

Join WhatsApp Group