(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಶನಿವಾರದಂದು ತರಗತಿಗಳನ್ನು ನಡೆಸಲು ಆದೇಶಿಸಲಾಗಿದೆ.

ಹೀಗಾಗಿ ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಜುಲೈನಲ್ಲಿ ಸುರಿದ ಅತಿ ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಏಳು ದಿನ ರಜೆ ಸಾರಲಾಗಿತ್ತು. ಆ ದಿನಗಳಿಂದ ವಿದ್ಯಾರ್ಥಿಗಳಿಗೆ ಆದ ನಷ್ಟವನ್ನು ಭರ್ತಿ ಮಾಡಲು14 ಶನಿವಾರಗಳಂದು ಇಡೀ ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.










