ಮಂಗಳೂರು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಭಾರತ ಸಂವಿಧಾನದ ಆಚರಣೆ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಥಾ ರಥವು ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್, ಕೊಲ್ನಾಡು ಗ್ರಾಮ ಪಂಚಾಯತ್, ವಿಟ್ಲ ನಗರ ಪಂಚಾಯತ್, ಸಾಲೆತ್ತೂರು ಗ್ರಾಮ ಪಂಚಾಯತ್‍ನಲ್ಲಿ ಸಂಚರಿಸಿತು. ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯತ್ ಮೂಲಕ ತಾಲೂಕಿಗೆ ಆಗಮಿಸಿತು.

ಸಂಪನ್ಮೂಲ ವ್ಯಕ್ತಿಗಳಾದ ಅರವಿಂದ ಚೊಕ್ಕಾಡಿ ಸಂವಿಧಾನದ ಪ್ರಸ್ತಾವನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ತಹಶೀಲ್ದಾರರು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಸಂವಿಧಾನ ಕುರಿತಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಕಾರ್ಯನಿರ್ವಹಣಾ ಅಧಿಕಾರಿಗಳು ಅಭಿನಂದಿಸಿದರು. ಮಂಗಳೂರಿನ ಕಲಾ ತಂಡದವರು ಜಾಗೃತಿ ಗೀತೆ ಮತ್ತು ನಾಟಕ ಪ್ರದರ್ಶಿಸಿದರು. ಡಾ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು. ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಒಳಗೊಂಡ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರವನ್ನು ಪ್ರದರ್ಶಿಸಲಾಯಿತು. ನಾಗರೀಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನೊಳಗೊಂಡ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.

error: Content is protected !!
Scroll to Top