ಮಂಗಳೂರಿನಲ್ಲಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ – ನಗರದಲ್ಲಿ ಪೊಲೀಸ್ ಸರ್ಪಗಾವಲು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.14. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದು, ರೋಡ್ ಶೋಗೆ ಕ್ಷಣ ಗಣನೆ ಆರಂಭವಾಗಿದೆ.

ಮೈಸೂರಿನಲ್ಲಿ ಸಾರ್ವಜನಿಕ ಸಮಾವೇಶ ಮುಗಿಸಿ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು ನೇರವಾಗಿ ಲೇಡಿಹಿಲ್‌ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ರಾತ್ರಿ 7.45ಕ್ಕೆ ರೋಡ್‌ ಶೋ ಆರಂಭವಾಗಲಿದ್ದು, ಈಗಾಗಲೇ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌,ಪಿವಿಎಸ್‌ ಮೂಲಕ ಸಾಗುವ ರೋಡ್‌ಶೋ ನವಭಾರತ ವೃತ್ತದಲ್ಲಿ ಸಮಾಪ್ತಿಗೊಳ್ಳಲಿದ್ದು, ಅಲ್ಲಿಂದ ಪ್ರಧಾನಿ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸಿ ವಿಶೇಷ ವಿಮಾನ ಮೂಲಕ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಗರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಎಸ್.ಪಿ.ಜಿ. ನೇತೃತ್ವದಲ್ಲಿ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಸಾವಿರಕ್ಕೂ ಅಧಿಕ ಪೊಲೀಸರು ಭದ್ರತೆಯಲ್ಲಿ ತೊಡಗಿಕೊಂಡಿದ್ದಾರೆ. ಲೇಡಿಹಿಲ್ ನಿಂದ ನವಭಾರತ ವೃತ್ತದವರೆಗಿನ ರಸ್ತೆಯಲ್ಲಿ ಸಾರ್ವಜನಿಕರ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

Scroll to Top