(ನ್ಯೂಸ್ ಕಡಬ) newskadaba.com ತುಮಕೂರು, ಆ. 14. ತುಮಕೂರು ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ 6 ಲಕ್ಷ 92 ಸಾವಿರದ 508 ಪಡಿತರ ಚೀಟಿಗಳ ಪೈಕಿ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದುಪಡಿಸಬೇಕೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಆದಾಯ ತೆರಿಗೆ ಪಾವತಿ ಮಾಡುವ ಕುಟುಂಬದ ಆದಾಯ 1.20ಲಕ್ಷಕ್ಕಿಂತ ಹೆಚ್ಚಿರುವ, ಸರ್ಕಾರಿ ನೌಕರರು, 3 ಹೆಕ್ಟೇರ್ಗಿಂತ ಹೆಚ್ಚು ಭೂಮಿ ಹೊಂದಿರುವ ಪಡಿತರ ಚೀಟಿಗಳನ್ನು ರದ್ದುಪಡಿಸಲು ಹಿಂದಿನ ಸಭೆಯಲ್ಲಿ ಸೂಚಿಸಲಾಗಿದ್ದರೂ ಕೇವಲ 98 ಸಾವಿರದ 893 ಪಡಿತರ ಚೀಟಿಗಳನ್ನು ಮಾತ್ರ ರದ್ದುಪಡಿಸಲಾಗಿದೆ. ಉಳಿದ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸೂಚನೆನೀಡಿದ್ದಾರೆ.








