ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 15. ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್ ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ (SUP) ತಯಾರಿಕೆ. ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಸಲ್ಪಟ್ಟಿರುತ್ತವೆ.
ಮುಂದುವರೆದು, ಭಾರತ ಸರ್ಕಾರದ ಗೃಹ ಮಂತ್ರಾಲಯವು (ಸಾರ್ವಜನಿಕ ವಿಭಾಗ) 05.08.2021 ರಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಸೂಚಿಸಿದೆ. ಪ್ಲಾಸ್ಟಿಕ್ ಬಾವುಟಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು ಬಳಸುವ ಬಗ್ಗೆ ಹಾಗೂ ಸದರಿ ಕಾರ್ಯಕ್ರಮಗಳ ನಂತರ ಉಪಯೋಗಿಸಿದ ಧ್ವಜಗಳನ್ನು ಧ್ವಜದ ಘನತೆಗೆ ಅನುಗುಣವಾಗಿ ವಿಲೇವಾರಿ ಮಾಡಲು ವ್ಯಾಪಕ ಪ್ರಚಾರ ನೀಡಲು ತಿಳಿಸಿರುತ್ತದೆ. ಆದುದರಿಂದ ಸದರಿ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶಿಸಲಾಗಿದೆ. ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಪರಿಸರ (ಸಂರಕ್ಷಣೆ) ಕಾಯ್ದೆ, 1986 ರ ಸೆಕ್ಷನ್ 19 ರ ಅನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಉಲ್ಲಂಘಿಸಿದವರ ಮೇಲೆ ಆಯಾ ವ್ಯಾಪ್ತಿಯಲ್ಲಿ ಬರುವ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಲು ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ: ಅಪಜೀ 17 ಇಪಿಸಿ 2012, ಬೆಂಗಳೂರು, ದಿನಾಂಕ: 11.03.2016 ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು.
ಈ ಹಿನ್ನಲೆಯಲ್ಲಿ ಇನ್ನು ಮುಂದೆ ಹಾಗೂ ಮುಂಬರುವ ಸ್ವಾತಂತ್ರ್ಯ ದಿನಾಚಾರಣೆ ಹಾಗೂ ವಿವಿಧ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾವುಟ ಹಾಗೂ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಉತ್ಪಾದನೆ, ಮಾರಾಟ ನಿಷೇಧಿಸಲಾಗಿದೆ. ಉಲ್ಲಂಘಿಸಿದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಂಗಳೂರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group