ಕೊಂಬಾರಿನ ದಲಿತ ಯುವಕನ ನಿಗೂಢ ಸಾವಿನ ಸೂಕ್ತ ತನಿಖೆಗೆ ಆಗ್ರಹ ► ಆರೋಪಿಗಳಿಗೆ ಶಿಕ್ಷೆಯಾಗದಿದ್ದಲ್ಲಿ ಸುಬ್ರಹ್ಮಣ್ಯ ಠಾಣೆಗೆ ಮುತ್ತಿಗೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.02. ಗೌಡ ಸಮುದಾಯದ ಹುಡುಗಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ದಲಿತ ಯುವಕನೋರ್ವನನ್ನು ನಿಗೂಢವಾಗಿ ಕೊಲೆ‌ ನಡೆಸಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಗುರುವಾರದಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ, ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಆನಂದ್ ಮಿತ್ತಬೈಲ್, ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಾಯರಡ್ಕ ನಿವಾಸಿ ಗಣೇಶ್ ಎಂಬವರ ಪುತ್ರ ಜಯಪ್ರಕಾಶ್ (19) ಎಂಬಾತನನ್ನು ಕಳೆದ ಡಿಸೆಂಬರ್ 13 ರಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದ್ದು, ಘಟನೆಯನ್ನು ಆಕಸ್ಮಿಕ ಮರಣ ಎಂದು ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ. ನಿಕಟಪೂರ್ವ ಎಸ್ಪಿಯವರಿಗೆ ಸೂಕ್ತ ದಾಖಲೆಗಳಿಂದಿಗೆ ಮನವಿ ನೀಡಲಾಗಿದ್ದರೂ, ಯಾವುದೇ ಪ್ರಯೋಜನವಾಗಿರಲಿಲ್ಲ. ಇದೀಗ ಹಾಲಿ ಎಸ್ಪಿಗೆ ಮನವಿ ಸಲ್ಲಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಭರವಸೆ ಈಡೇರದಿದ್ದಲ್ಲಿ ಸುಬ್ರಹ್ಮಣ್ಯ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಪ್ರ. ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಹಾಗೂ ಮೃತರ ಕುಟುಂಬಸ್ಥರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group