ವಿಧಾನಪರಿಷತ್ ಉಪಚುನಾವಣೆ- ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅ. 21ರಂದು ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಅಕ್ಟೋಬರ್ 21ರಂದು ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬ‌ರ್ 24ರಂದು ಮತ ಎಣಿಕೆ ನಡೆಯಲಿರುವುದಾಗಿ ತಿಳಿದುಬಂದಿದೆ. ಇಂದಿನಿಂದಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.

ಈ ಕ್ಷೇತ್ರದಿಂದ ಸತತವಾಗಿ ಗೆಲ್ಲುತ್ತಾ ಬಂದಿರುವ ಬಿಜೆಪಿಯ ಕೋಟ ಶ್ರೀನಿವಾಸ್ ಪೂಜಾರಿ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಹಿನ್ನೆಲೆ ಅವರಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಈಗ ವಿಧಾನಪರಿಷತ್ ಚುನಾವಣೆ ನಡೆಯುತ್ತಿದೆ.

Scroll to Top