‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಡನೆ; ವಿಪಕ್ಷಗಳಿಂದ ಭಾರೀ ವಿರೋಧ

(ನ್ಯೂಸ್ ಕಡಬ) newskadaba.com ಡಿ. 17ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಗಳವಾರ ಮಂಡನೆಯಾಗಿದೆ. ಈ ಪ್ರಸ್ತಾವನೆಯು ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ʼಒಂದು ರಾಷ್ಟ್ರ, ಒಂದು ಚುನಾವಣೆʼ ಮಸೂದೆಯನ್ನು ಮಂಡಿಸಿದರು. ಮಸೂದೆ ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿವೆ. ಈ ಬಗ್ಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಸಂಸದ ಮನೀಶ್ ತಿವಾರಿ, ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್, ತೃಣಮೂಲದ ಕಲ್ಯಾಣ್ ಬ್ಯಾನರ್ಜಿ, ಡಿಎಂಕೆಯ ಟಿಆರ್ ಬಾಲು ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ (ಶರದ್ ಪವಾರ್ ಬಣ) ಸೇರಿದಂತೆ ಹಲವು ಸಂಸದರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮನೀಶ್ ತಿವಾರಿ ಮಾತನಾಡಿ, ನಾವು ಈ ಮಸೂದೆಯನ್ನು ವಿರೋಧಿಸುತ್ತೇವೆ. ಇದು ಸಂವಿಧಾನದ ಮೂಲ ರಚನೆಯ ಮೇಲಿನ ಆಕ್ರಮಣ ಎಂದು ಕಿಡಿ ಕಾರಿದ್ದಾರೆ.

Scroll to Top