ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೂಲ ಸೌಕರ್ಯಗಳ ಸಮಸ್ಯೆ;ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನ ನೀಡುವಂತೆ ಬಿಜೆಪಿ ಆಗ್ರಹ

(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಬೆಂಗಳೂರಿನಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾರ್ಯಗಳ ಕೈಗೊಳ್ಳುವಂತೆ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ.

ಈ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ಪತ್ರಕ್ಕೆ ನಗರದ ಎಲ್ಲಾ ಬಿಜೆಪಿ ಶಾಸಕರು ಸಹಿಹಾಕಿ, ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು ನಗರ ದಿನದಿಂದ ದಿನಕ್ಕೆ ಶಿಥಿಲವಾಗುತ್ತಿದ್ದು, ತಪ್ಪು ಕಾರಣಗಳಿಗಾಗಿ ಹೊರ ದೇಶಗಳ ಗಮನ ಸೆಳೆಯುತ್ತಿದೆ ಎಂದು ಹೇಳಿದ್ದಾರೆ.

ನಗರದ ಪ್ರಮುಖ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳು ದುಸ್ಥಿತಿಗೆ ತಲುಪಿವೆ. ವಾಹನ ಸವಾರರು ಹಾಗೂ ನಾಗರಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ಮಾಹಿತಿ ತಂತ್ರಜ್ಞಾನದ ತಾಣವಾಗಿದ್ದು, ದೇಶ-ವಿದೇಶಗಳಿಂದ ಪ್ರವಾಸಿಗರು ಪ್ರತಿದಿನ ಇಲ್ಲಿಗೆ ಬರುತ್ತಾರೆ. ಮೂಲಸೌಕರ್ಯಗಳ ಕೊರತೆಯಿಂದ ಹಲವು ಕಂಪನಿಗಳು ನೆರೆ ರಾಜ್ಯಗಳಿಗೆ ತೆರಳುತ್ತಿವೆ. ಹೀಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಪ್ರತಿ ಕ್ಷೇತ್ರಕ್ಕೆ ಕ್ಷೇತ್ರಕ್ಕೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿ ಮೂಲ ಸೌಕರ್ಯಗಳ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.

Scroll to Top