ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.09:ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಕಾಲ್ತುಳಿತದದಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Nk Cake House

ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ಟೋಕನ್ ವಿತರಣೆಗೆ ಟಿಟಿಡಿ ವ್ಯವಸ್ಥೆ ಮಾಡಿದೆ. ಆದರೆ, ನಿನ್ನೆ ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ಕಾಲ್ತುಳಿತ ಸಂಭವಿಸಿದೆ.

ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಇದೇ ವೇಳೆ ಭಕ್ತರೊಬ್ಬರು ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಖ್ಯ ಗೇಟ್ ತೆರೆಯಲಾಯಿತು. ಈ ಸಂದರ್ಭ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ನುಗ್ಗಿದ್ದಾರೆ. ಹೀಗಾಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನು ಕಾಲ್ತುಳಿತದಲ್ಲಿ ಗಾಯಗೊಂಡವರ ಸಂಖ್ಯೆ ಏರಿಕೆಯಾಗುವ ನಿರೀಕ್ಷೆ ಇದೆ.

Scroll to Top