(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ಸಾಲ ನೀಡುವ ಸಂಸ್ಥೆಗಳು, ಕಿರುಬಂಡವಾಳ ಸಂಸ್ಥೆಗಳು ಕಪ್ಪು ಹಣವನ್ನು ಬಿಳಿ ಹಣವಾಗಿ ಪರಿವರ್ತಿಸುವ ಸಾಧನಗಳಾಗಿ ಮಾರ್ಪಟ್ಟಿದ್ದು, ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಕಾನೂನು ಸಚಿವ ಎಚ್ಕೆ ಪಾಟೀಲ್ ಸೋಮವಾರ ಹೇಳಿದರು.

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಮೈಕ್ರೋ ಫೈನಾನ್ಸ್) ಮಸೂದೆಗೆ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ವಿಧೇಯಕದ ಕುರಿತು ಮಾತನಾಡಿದ ಎಚ್ಕೆ ಪಾಟೀಲ್ ಅವರು, ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸುವುದು ಮೊದಲಾದ ಅಂಶಗಳನ್ನು ಒಳಗೊಂಡಿದೆ. ಕಾನೂನು ಬದ್ಧ ಲೇವಾದೇವಿಯನ್ನು ನಿಷೇಧಿಸುವುದಿಲ್ಲ ಆದರೆ ಬಲವಂತವಾದ ಸಾಲ ವಸೂಲಾತಿಯನ್ನು ನಿರ್ಬಂಧಿಸಲಿದೆ. ಅಧಿಕ ಬಡ್ಡಿ ವಿಧಿಸಿ ತೊಂದರೆ ಕೊಡುವುದರಿಂದ ಸಾಲಗಾರರು ಬೀದಿಗೆ ಬರುವಂತಹ ಮತ್ತು ಆತಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ದೂಡುವುದನ್ನು ತಡೆಯಲು ಹಾಗೂ ತಪ್ಪಿತಸ್ಥರಿಗೆ 10 ವರ್ಷ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲು ಈ ವಿಧೇಯಕವನ್ನು ಮಂಡಿಸಲಾಗಿದೆ ಎಂದು ಹೇಳಿದರು.