(ನ್ಯೂಸ್ ಕಡಬ) newskadaba.com ಜೂ:04, ಮಂಗಳೂರು: ಮಂಗಳೂರು: ಮಳೆಗಾಲದ ನಡುವೆ ಕಳೆದ ಕೆಲವು ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವರಣವೂ ಕಂಡು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೂ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮ ಗಳನ್ನು ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕಳೆದ ಐದು ತಿಂಗಳ ಅವಧಿಯಲ್ಲಿ ದ.ಕ. ಜಿಲ್ಲೆಯಲ್ಲಿ 43 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದರೆ, ಮೇ ತಿಂಗಳೊಂದರಲ್ಲೇ 10 ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ (2024)ರಲ್ಲಿ ಒಟ್ಟು 534 ಡೆಂಗ್ಯೂ ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿದ್ದವು.