(ನ್ಯೂಸ್ ಕಡಬ) newskadaba.com, ಆ.08: ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಕಿಡಿಕಾರಿದ್ದಾರೆ.
ಗುರುವಾರ ನವದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದಿದ್ದಾರೆ.
ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದು ಹೇಳಿದ್ದಾರೆ.
ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಒತ್ತಾಯಿಸಿದ್ದಾರೆ.













