(ನ್ಯೂಸ್ ಕಡಬ) newskadaba.com, ಆ.15:ಕೆಂಪುಕೋಟೆಯಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.
‘ನಯ ಭಾರತ’ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಘೋಷವಾಕ್ಯವಾಗಿದೆ. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ ಭಾರತದ ನಿರಂತರ ಉದಯವನ್ನು ಸ್ಮರಿಸುವ ಧ್ಯೇಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ ಬಳಿಕ ಕೆಂಪು ಕೋಟೆಗೆ ಆಗಮಿಸಿದರು. ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದರು. ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೋದಿ ಅವರು, “ಪೆಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆಯಿತು. ಧರ್ಮ ಕೇಳಿ ಹತ್ಯೆ ಮಾಡಲಾಯಿತು. ಪತ್ನಿ ಎದುರು ಪತಿಯನ್ನು, ಮಗನ ಮುಂದೆ ತಂದೆಯನ್ನು ಹತ್ಯೆ ಮಾಡಲಾಯಿತು. ಇಡೀ ದೇಶದಲ್ಲಿ ಆಕ್ರೋಶ ಮಡುಗಟ್ಟಿತ್ತು. ಆಪರೇಷನ್ ಸಿಂಧೂರ ಈ ಆಕ್ರೋಶದ ಪ್ರತಿಬಿಂಬವಾಗಿತ್ತು. ನಾವು ನಮ್ಮ ಸೇನೆಗೆ ಪೂರ್ಣ ಸ್ವಾತಂತ್ರ್ಯ ನೀಡಿದೆವು. ದಾಳಿ, ಸಮಯ, ಗುರಿ ಎಲ್ಲವನ್ನು ನಿರ್ಧರಿಸಲು ಸ್ವಾತಂತ್ರ್ಯ ನೀಡಲಾಯಿತು. ಸೇನೆ ಹಿಂದೆ ಮಾಡದ ಸಾಹಸವನ್ನು ಮೊದಲ ಬಾರಿಗೆ ಮಾಡಿತು. ಪಾಕಿಸ್ತಾನದ ಒಳಗೆ ನುಗ್ಗಿ ದಾಳಿ ಮಾಡಿತು. ಪಾಕಿಸ್ತಾನದ ಆದ ನಷ್ಟ ಎಷ್ಟಿದೆ ಅಂದರೆ ನಿತ್ಯ ಹೊಸ ಮಾಹಿತಿ ಬರ್ತಿದೆ” ಎಂದು ತಿಳಿಸಿದ್ದಾರೆ.










