(ನ್ಯೂಸ್ ಕಡಬ) newskadaba.com, ಆ.17: ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಬಳಿಕ ಅವರು ಮೊದಲ ಬಾರಿಗೆ ತಾಯ್ನಾಡಿಗೆ ಮರಳಿದ್ದಾರೆ. ಭಾರತದ ಗಗನಯಾನ ಮಿಷನ್ಗೆ ಆಯ್ಕೆಯಾದ ಮತ್ತೋರ್ವ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ಕೂಡ ಭಾರತಕ್ಕೆ ಮರಳಿದ್ದಾರೆ.
ಅಮೇರಿಕಾದಿಂದ ಮಧ್ಯರಾತ್ರಿ 1.30ರ ವೇಳೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್, ದೆಹಲಿ ಸಿಎಂ ರೇಖಾ ಗುಪ್ತಾ ಭವ್ಯ ಸ್ವಾಗತ ಕೋರಿದ್ದಾರೆ. ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಬಳಿಕ ಅವರು ತಮ್ಮ ತವರು ಲಕ್ನೋಗೆ ತೆರಳಲಿದ್ದಾರೆ.
ಶುಭಾಂಶು ಶುಕ್ಲಾ ಅವರು ಜೂ.25ರಂದು ಅಮೇರಿಕಾದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಹೊರಟು ಜೂ.26ರಂದು ಐಎಸ್ಎಸ್ನೊಂದಿಗೆ ಸಂಪರ್ಕ ಸಾಧಿಸಿ ನಾಸಾದ ಆಕ್ಸಿಯಮ್-4 ಖಾಸಗಿ ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.










