(ನ್ಯೂಸ್ ಕಡಬ) newskadaba.com ಆ. 19: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ಅಪಪ್ರಚಾರ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸ ಆಗಿದ್ದು, ರಾಜ್ಯ ಸರಕಾರಕ್ಕೆ ಧರ್ಮಸ್ಥಳ- ಶ್ರೀ ಮಂಜುನಾಥೇಶ್ವರನ ಬಗ್ಗೆ ಕಿಂಚಿತ್ತಾದರೂ ನಂಬಿಕೆ ಇದ್ದರೆ, ಆ ಶಕ್ತಿಗಳ ಕುರಿತು ಸರಕಾರ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದರು.
ಇದೇ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್ಸಿ ಸಮುದಾಯದ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು. ನೀವು ತೆಗೆದುಕೊಳ್ಳುವ ತೀರ್ಮಾನದಿಂದ ನಾಳೆ ಇತರ ಜಾತಿಗಳು, ಎಸ್ಸಿ ಸಮುದಾಯದವರು ಬೀದಿಗಿಳಿದು ಹೋರಾಟ ಮಾಡದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.








