(ನ್ಯೂಸ್ ಕಡಬ) newskadaba.com, ಆ.26 ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ವಿಧಾನಪರಿಷತ್ ನಾಮನಿರ್ದೇಶಿತ ಸ್ಥಾನಗಳ ನೇಮಕಾತಿಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮತ್ತು ದಲಿತ ಸಂಘರ್ಷ ಸಮಿತಿ ನಾಯಕ ಡಿಜಿ ಸಾಗರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಬದಲಾಗಿ ಹೊಸ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ.
ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಅನಿವಾಸಿ ಭಾರತೀಯ ಕೋಶದ (ಎನ್ಆರ್ಐ) ಉಪಾಧ್ಯಕ್ಷೆ ಆರತಿ ಕೃಷ್ಣ; ಹಿರಿಯ ಪತ್ರಕರ್ತ ಮತ್ತು ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ನ ಮೈಸೂರು ಬ್ಯೂರೋ ಮುಖ್ಯಸ್ಥ ಕೆ ಶಿವಕುಮಾರ್ ಮತ್ತು ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಮುಖಂಡ, ಅಂಬೇಡ್ಕರ್ ಫೌಂಡೇಶನ್ನ ಉಪಾಧ್ಯಕ್ಷ ಎಫ್ಎಚ್ ಜಕಪ್ಪನವರ್ ಅವರನ್ನು ನಾಮನಿರ್ದೇಶನ ಮಾಡಲು ತೀರ್ಮಾನಿಸಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ನಾಮನಿರ್ದೇಶನ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ‘ಅಧಿಕೃತ ಪಟ್ಟಿಗಾಗಿ ಕಾಯುತ್ತಿದ್ದೇನೆ” ಎಂದು ಹೇಳಿದ್ದಾರೆ.
ಈಗಾಗಲೇ ಪಟ್ಟಿಯನ್ನು ರಾಜ್ಯಪಾಲರ ಕಚೇರಿಗೆ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ದೃಢಪಡಿಸಿವೆ.













