(ನ್ಯೂಸ್ ಕಡಬ) newskadaba.com, ಆಗಸ್ಟ್ 28 ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಡಿಪೋರ್ ಜಿಲ್ಲೆಯ ಗುರೆಜ್ ಸೆಕ್ಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲೆ ಮಾಡಲಾಗಿದೆ. ಗುರೆಜ್ ವಲಯದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.
ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜೆಕೆಪಿ ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಗುರೆಜ್ ಸೆಕ್ಟರ್ನಲ್ಲಿ #IndianArmy ಮತ್ತು @JmuKmrPolice ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಒಳ ನುಸುಳುತ್ತಿದ್ದ ಭಯೋತ್ಪಾದಕರು ಹಾಗೂ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಲಾಗಿದೆ ಚಿನಾರ್ ಕಾರ್ಪ್ಸ್ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ.
ಆಗಸ್ಟ್ 9 ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಸೇನಾ ಮೂಲಗಳ ಪ್ರಕಾರ, ಕನಿಷ್ಠ ಮೂವರು ಭಯೋತ್ಪಾದಕರು ದಟ್ಟ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ. ಈ ವಾರದ ಆರಂಭದಲ್ಲಿ, ಶ್ರೀನಗರದ ದಾಚಿಗಾಮ್ನಲ್ಲಿ ದಾಳಿಯ ಮಾಸ್ಟರ್ಮೈಂಡ್ ಸುಲೇಮಾನ್ ಶಾ ಸೇರಿದಂತೆ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ಮರುದಿನ, ‘ಆಪರೇಷನ್ ಶಿವ ಶಕ್ತಿ’ ಅಡಿಯಲ್ಲಿ ಪೂಂಚ್ ವಲಯದ ಗಡಿರೇಖೆಯಲ್ಲಿ ಒಳನುಸುಳಲು ಯತ್ನಿಸಿದ ಇನ್ನಿಬ್ಬರು ಭಯೋತ್ಪಾದಕರನ್ನು ನಿಷ್ಕ್ರಿಯಗೊಳಿಸಲಾಯಿತು. ಕಳೆದ ಕೆಲವು ತಿಂಗಳಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಹಲವು ಭಯೋತ್ಪಾದಕರು ಮತ್ತು ಬೆಂಬಲಿಗರನ್ನು ಬಂಧಿಸಲಾಗಿದೆ.










