(ನ್ಯೂಸ್ ಕಡಬ) newskadaba.com, ಅ.15: ಯಾವುದೇ ಕಾರಣಗಳ ನೀಡದೆ ಸಾಮಾಜಿಕ-ಆರ್ಥಿಕ ಸಮೀಕ್ಷೆಯಿಂದ ದೂರ ಉಳಿದ 2,300 ಸಿಬ್ಬಂದಿ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ‘ನೋ ವರ್ಕ್ ನೋ ಪೇ’ ಆದೇಶ ಹೊರಡಿಸಿದ್ದಾರೆ.
ಪದೇ ಪದೇ ನೋಟಿಸ್ ಮತ್ತು ಎಸ್ಎಂಎಸ್ ಕಳುಹಿಸಿದರೂ ಈ ಗಣತಿದಾರರು ಕೆರ್ತವ್ಯಕ್ಕೆ ಹಾಜರಾಗಿಲ್ಲ. ಯಾವುದೇ ಕಾರಣ ನೀಡದೆ, ಅನಧಿಕೃತವಾಗಿ ಗೈರುಹಾಜರಿದ್ದಾರೆ. ಇದು ಗಂಭೀರ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ಅನಧಿಕೃತ ಗೈರುಹಾಜರಿ ಅವಧಿಯ ವೇತನ ನೀಡದಂತೆ ಕ್ರಮ ಕೈಗೊಳ್ಳಲು ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ಗೈರಾಗಿರುವವರು ಸಮೀಕ್ಷೆ ಕಾರ್ಯಕ್ಕೆ ತಕ್ಷಣ ಹಾಜರಾಗಿ, ತಮಗೆ ಹಂಚಿಕೆಯಾಗಿರುವ ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕು. ಇಲ್ಲವಾದರೆ, ಅನಧಿಕೃತವಾಗಿ ಗೈರಾಗಿರುವ ಸಮೀಕ್ಷಾದಾರರ ವಿರುದ್ಧ ಪ್ರತಿದಿನ ಕ್ರಮ ಕೈಗೊಳ್ಳಲಾಗುತ್ತದೆ. ಗೈರುಹಾಜರಾಗುವುದನ್ನು ಮುಂದುವರಿಸಿದರೆ ಅಮಾನತು ಸೇರಿದಂತೆ ಶಿಸ್ತು ಕ್ರಮಕ್ಕೆ ಅವರೇ ಹೊಣೆಗಾರರಾಗಿರುತ್ತಾರೆಂದು ತಿಳಿಸಿದ್ದಾರೆ.
21,000 ಗಣತಿದಾರರಲ್ಲಿ 18,000 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗರ್ಭಿಣಿಯರು, ಒಂದು ವರ್ಷದೊಳಗಿನ ಮಕ್ಕಳನ್ನು ಹೊಂದಿರುವ ತಾಯಂದಿರು ಮತ್ತು ಗಂಭೀರ ಆರೋಗ್ಯ ಸಮಸ್ಯೆಗಳಿರುವವರನ್ನು ಸಮೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.













