ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳು



(ನ್ಯೂಸ್ಕಡಬ) newskadaba.com,  .18: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು, ಸಾವಿರಾರು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡರು.





ಶುಕ್ರವಾರ ಮಧ್ಯಾಹ್ನ 1.44ಕ್ಕೆ ತೀರ್ಥರೂಪಿಣಿಯಾಗಿ ತಾಯಿ ಕಾವೇರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದಳು. ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 11ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಷ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು.






ತೀರ್ಥೋದ್ಭವ ಆಗುತ್ತಿದ್ದಂತೆ ಅರ್ಚಕ ವೃಂದದವರಿಂದ ಭಕ್ತರ ಮೇಲೆ ಕಾವೇರಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಭಾಗಮಂಡಲದ ಶ್ರೀ ಭಂಗಡೇಶ್ವರ ದೇವಾಲಯಕ್ಕೆ ಮೊದಲು ತೀರ್ಥವನ್ನು ಸಂಗ್ರಹಿಸಿ ಅಭಿಷೇಕ ಮಾಡಲಾಯಿತು.

ತೀರ್ಥೋದ್ಭವ ಸಮಯ ಸಮೀಪಿಸುತ್ತಿದ್ದಂತೆ ಪವಿತ್ರ ತೀರ್ಥ ಕುಂಡಿಕೆಯಲ್ಲಿ ಭಕ್ತರಿಂದ ನೂಕು ನುಗ್ಗಲು ಉಂಟಾಯಿತು. ಭಕ್ತರು ಬ್ಯಾರಿಕೇಡ್ ಭೇಧಿಸಿ ಕುಂಡಿಕೆ ಮುಂದೆ ತೀರ್ಥಕ್ಕಾಗಿ ಕಾತರದಿಂದ ಕಾದರು. ಮಧ್ಯಾಹ್ನದ ವೇಳೆ ತೀರ್ಥೋದ್ಭವವಾದ್ದರಿಂದ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಭಕ್ತರು ಮಾತೆ ಕಾವೇರಿ ದರ್ಶನವನ್ನು ಪಡೆದರು.

ನೂರಾರು ಕೊಡವರು ತಮ್ಮ ಸಾಂಪ್ರದಾಯಿಕ ಉಡುಪನ್ನು ಧರಿಸಿ, ಭಾಗಮಂಡಲದಿಂದ ತಲಕಾವೇರಿಯವರೆಗೆ ಸುಮಾರು 8 ಕಿ.ಮೀ. ಕಾಲಿನಲ್ಲೇ ನಡೆದು ಭಕ್ತಿಯ ಪ್ರದರ್ಶಿಸಿದರು.

error: Content is protected !!
Scroll to Top