(ನ್ಯೂಸ್ ಕಡಬ) newskadaba.com, ಅ.20 ಶಿವಮೊಗ್ಗ: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.“ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು.
“ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆಗೂ ಅವಕಾಶವಿರಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ” ಎಂದು ಹೇಳಿದರು.
“ನವೆಂಬರ್ ಎರಡನೇ ವಾರದಲ್ಲಿ ಸಿಎಂ ಗುದ್ದಲಿ ಪೂಜೆ ಮಾಡಲಿದ್ದಾರೆ, ಎಐ ಆಧಾರಿತ ಶಿಕ್ಷಣ ನೀಡಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈಗ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುವುದು.೬ನೇ ತರಗತಿಯಿಂದಲೇ ಸ್ಕಿಲ್ ಸ್ಕೂಲ್ ಪ್ರಾರಂಭಿಸಲಾಗುವುದು” ಎಂದರು.












