(ನ್ಯೂಸ್ ಕಡಬ) newskadaba.com, ಅ..24: ನವೆಂಬರ್ ನಂತರ ತಮ್ಮ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ನಾಲ್ಕು ತಿಂಗಳ ಹಿಂದೆಯೇ ಸಂಪುಟ ವಿಸ್ತರಣೆ ಮಾಡುವಂತೆ ಸೂಚಿಸಿತ್ತು. ಆದರೆ ತಮ್ಮ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಪುನಾರಚನೆ ಮಾಡುವುದಾಗಿ ತಿಳಿಸಿದ್ದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಮೈಲಿಗಲ್ಲು ತಲುಪಿದ ನಂತರ, ನಾನು ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸುತ್ತೇನೆ ಮತ್ತು ಅವರ ಮಾರ್ಗದರ್ಶನದಂತೆ ಮುಂದುವರಿಯುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದರು.
ನವೆಂಬರ್ 16 ರಂದು ನವದೆಹಲಿಗೆ ಭೇಟಿ ನೀಡಲಿರುವ ಅವರು, ಪಕ್ಷದ ಮಾಜಿ ನಾಯಕ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಬರೆದ ಪುಸ್ತಕ ಬಿಡುಗಡೆಗಾಗಿ ತೆರಳುತ್ತಿರುವುದಾಗಿ ಸ್ಪಷ್ಟ ಪಡಿಸಿದರು. ಈ ವೇಳೆ ನಾನು ಪಕ್ಷದ ಹೈಕಮಾಂಡ್ ಸಹ ಭೇಟಿ ಮಾಡುತ್ತೇನೆ. ರಾಜ್ಯದ ಆಡಳಿತ ಮತ್ತು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಅವರಿಗೆ ವಿವರಿಸುವುದು ನಮ್ಮ ಕರ್ತವ್ಯ” ಎಂದು ಅವರು ಹೇಳಿದರು. ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಸಿದ್ದರಾಮಯ್ಯ ಹೇಳಿದರು.












