(ನ್ಯೂಸ್ ಕಡಬ) newskadaba.com, ನ..01: ಕೃತಕಬುದ್ಧಿಮತ್ತೆಯ ತಂತ್ರಜ್ಞಾನ ಇಡೀ ಜಗತ್ತನ್ನು ಆಕ್ರಮಿಸುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗುವ ಆತಂಕವಿದೆ. ಹೊಸ ಸವಾಲಿಗೆ ತಕ್ಕ ಹಾಗೆ ಭಾಷೆಯನ್ನು ಸಜ್ಜುಗೊಳಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆಗೆ ಅನುಗುಣವಾಗಿ ಭಾಷೆಯನ್ನು ಮೇಲ್ದರ್ಜೆಗೆರಿಸಲು ತಂತ್ರಜ್ಞರು ಹಾಗೂ ವಿದ್ವಾಂಸರು ಒಗ್ಗೂಡಿ ಕೆಲಸ ಮಾಡಬೇಕು. ಸರ್ಕಾರ ಕೂಡ ಕನ್ನಡ ಭಾಷೆ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟಕ್ಕೇರಿಸಲು ಹೊಸ ನೀತಿ ರೂಪಿಸಲಿದೆ ಎಂದು ಹೇಳಿದರು.












