(ನ್ಯೂಸ್ ಕಡಬ) newskadaba.com, ನ..01: ದೇಶದಲ್ಲಿ ಮತ್ತೊಂದು ಕಾಲ್ತುಳಿತ ಪ್ರಕರಣ ವರದಿಯಾಗಿದ್ದು, ಆಂಧ್ರಪ್ರದೇಶದ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಆಂಧ್ರ ಪ್ರದೇಶದ ಶ್ರೀಕಾಕುಳನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು ದುರಂತದಲ್ಲಿ ಕನಿಷ್ಛ 10 ಮಂದಿ ಭಕ್ತರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ, ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ಈ ಸಮಯದಲ್ಲಿ, ಜನಸಂದಣಿ ಹೆಚ್ಚಾದ ಕಾರಣ ಕಾಲ್ತುಳಿತ ಇದ್ದಕ್ಕಿದ್ದಂತೆ ಹೆಚ್ಚಾಯಿತು. ಕಾಲ್ತುಳಿತದಲ್ಲಿ ಅನೇಕ ಭಕ್ತರು ಗಂಭೀರವಾಗಿ ಗಾಯಗೊಂಡರು.
ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ, ದೇವಾಲಯದ ಸುತ್ತಮುತ್ತ ತೀವ್ರ ಉದ್ವಿಗ್ನತೆ ಉಂಟಾಗಿದೆ. ಘಟನೆ ನಡೆದ ದೇವಾಲಯಕ್ಕೆ ಪೊಲೀಸರು ತಲುಪಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.












