(ನ್ಯೂಸ್ ಕಡಬ) newskadaba.com, ನ.06 ಬೆಂಗಳೂರು : ಇದುವರೆಗೂ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ನೀಡಲಾಗುತ್ತಿದೆ. ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಯೋಜನೆ ರೂಪಿಸಿದೆ. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಸರಕಾರ ಚಿಂತನೆ ನಡೆಸಿದೆ. ಸರ್ಕಾರಿ ಕಾಲೇಜುಗಳ ಪ್ರವೇಶ ಅಧಿಕಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ ಹಾಗೂ ನಾನಾ ಕ್ರಮಗಳಿಗೆ ಮುಂದಾಗಿದೆ. ಅದರಲ್ಲಿ, ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡುವುದು ಕೂಡ ಒಂದಾಗಿದೆ. ಈ ಕುರಿತು ಪ್ರಸ್ತಾವವನ್ನು ಮಂಡಿಸಲು ಶಿಕ್ಷಣ ಇಲಾಖೆಗೆ ತಿಳಿಸಲಾಗಿದೆ. ಇದರ ಖರ್ಚುವಚ್ಚಗಳ ಬಗ್ಗೆ ಮಾಹಿತಿ ನೀಡಲು ಹಣಕಾಸು ಇಲಾಖೆಗೆ ಸೂಚಿಸಲಾಗಿದೆ.
ಪರೀಕ್ಷೆ ವೇಳಾಪಟ್ಟಿ ಪ್ರಕಟ
ಈ ನಡುವೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಂಡಳಿಯ ವೆಬ್ಸೈಟ್ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಎಸ್ಎಸ್ಎಲ್ಸಿ ಪರೀಕ್ಷೆ-1, 2026ರ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್ಎಸ್ಎಲ್ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2, 2026ರ ಏಪ್ರಿಲ್ 25ರಿಂದ ಮೇ 9ರವರೆಗೆ ನಡೆಯಲಿದೆ.












