(ನ್ಯೂಸ್ ಕಡಬ) newskadaba.com, ನ.29: ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಡಿಕೆ.ಶಿವಕುಮಾರ್ ಅವರು ಕಾವೇರಿ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಶಿವಕುಮಾರ್ ಅವರು ಉಪಹಾರ ಸೇವಿಸಿದ್ದಾರೆ. ಇದೀಗ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯವಾಗಿದ್ದು, ಉಭಯ ನಾಯಕರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು.
ಸಿಎಂ ಸಿದ್ದರಾಮಯ್ಯ ಮಾತನಾಡಿ, ಹೈಕಮಾಂಡ್ ನಿರ್ಧಾರದ ಮೇಲೆ ನಾವಿಬ್ಬರೂ ಬ್ರೇಕ್ಫಸ್ಟ್ ಮೀಟಿಂಗ್ ಸೇರಿದ್ದೆವು. ಮೀಟಿಂಗ್ನಲ್ಲಿ 2028 ರ ಚುನಾವಣೆಯ ಕುರಿತು ಚರ್ಚೆ ನಡೆಸಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಗೆಲುವಿನ ಕುರಿತು ಚರ್ಚೆ ನಡೆಸಲಾಯಿತು. ನಮ್ಮ ಮುಖ್ಯ ಉದ್ದೇಶ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುವುದು. ನನ್ನ ಹಾಗೂ ಶಿವಕುಮಾರ್ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅನಗತ್ಯ ಚರ್ಚೆಗಳಿಗೆ ಇಂದು ನಾವು ಬ್ರೇಕ್ ಹಾಕಿದ್ದೇವೆ ಎಂದು ಭಾವಿಸುತ್ತೇವೆ ಎಂದು ಹೇಳಿದ್ದಾರೆ.












