(ನ್ಯೂಸ್ ಕಡಬ)com,ಡಿ.26: ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಸುಮಾರು 60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಅಯ್ಯರ್ ಇದೀಗ ಬೆಂಗಳೂರಿನ ಸಿಒಇ ಮೈದಾನದಲ್ಲಿ ನೆಟ್ಸ್ ಅಭ್ಯಾಸ ಆರಂಭಿಸಿದ್ದಾರೆ.
ಅಕ್ಟೋಬರ್ 25ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಯ್ಯರ್ ಗಾಯಗೊಂಡಿದ್ದರು. ಹರ್ಷಿತ್ ರಾಣಾ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಹೊಡೆದ ಭರ್ಜರಿ ಶಾಟ್ಗೆ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ ವೇಳೆ ಅವರ ಎಡ ಪಕ್ಕೆಲುಬಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಗುಲ್ಮ ಭಾಗದಲ್ಲಿ ಆಂತರಿಕ ರಕ್ತಸ್ರಾವ ಉಂಟಾಗಿತ್ತು. ಸ್ಕ್ಯಾನಿಂಗ್ ವರದಿಯಲ್ಲಿ ಗುಲ್ಮ ಭಾಗ ಛಿದ್ರಗೊಂಡಿರುವುದು ಪತ್ತೆಯಾಗಿದ್ದು, ಅವರನ್ನು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್ ಎಂಬೋಲೈಸೇಶನ್ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಚಿಕಿತ್ಸೆ ಮತ್ತು ವಿಶ್ರಾಂತಿಯ ಬಳಿಕ ಶ್ರೇಯಸ್ ಅಯ್ಯರ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ಮತ್ತೆ ಆಟಕ್ಕೆ ಮರಳಲು ಸಿದ್ಧರಾಗಿದ್ದಾರೆ.














