(ನ್ಯೂಸ್ ಕಡಬ) newskadaba.com ಕಡಬ, ಜ. 24. ಬಾಲಕನೋರ್ವ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿರುವ ವಸಂತ ಅಮೀನ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇರಳ ಮೂಲದವರಾಗಿರುವ ವಸಂತ ಅಮೀನ್ ಅವರು ರಾಮಕುಂಜ ಪಾದೆ ಎಂಬಲ್ಲಿ ಜಾಗ ಖರೀದಿಸಿ ಮನೆ ಮಾಡಿ ತಂದೆ, ಮಗ ಜೊತೆಯಾಗಿ ವಾಸವಿದ್ದರು. ಮಂಗಳೂರು ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯಾಗಿದ್ದ ಮೋಕ್ಷ ಅವರು ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎನ್ನುವುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.
ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








