(ನ್ಯೂಸ್ ಕಡಬ) newskadaba.com, ಎ.25: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ವರ್ಷದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ?೫,೦೦೦ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.
ಆಸಕ್ತರು ಕಡ್ಡಾಯವಾಗಿ ಹೆಸರು ನೋಂದಣಿ ಮಾಡಿಸಬೇಕಿದ್ದು, ನೋಂದಣಿಯ ವೇಳೆ ಆನ್ಲೈನ್ ಅಂಕಪಟ್ಟಿ, ವಿದ್ಯಾರ್ಥಿಯ ಭಾವಚಿತ್ರ ಹಾಗೂ ಪೂರ್ಣ ಹೆಸರು ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಘದ ಜಿಲ್ಲಾ ಖಜಾಂಚಿ ರಾಜು ನಲ್ಲಿಕರ್ (ಮೊ. ೯೮೮೦೧೯೫೨೫೬) ಅವರನ್ನು ಸಂಪರ್ಕಿಸಿ ಏಪ್ರಿಲ್ ೨೮ರೊಳಗೆ ಹೆಸರು ನೋಂದಣಿ ಮಾಡಿಸಬೇಕೆಂದು ತಿಳಿಸಿದ್ದು, ನಿಗದಿತ ಅವಧಿ ಬಳಿಕ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಸಂಘದ ಸದಸ್ಯರು ತಮ್ಮ ಎಸ್ಎಸ್ಎಲ್ಸಿ ಪಾಸಾದ ಮಕ್ಕಳ ವಿವರಗಳನ್ನು ಕಾಲಮಿತಿಯೊಳಗೆ ಸಲ್ಲಿಸಬೇಕೆಂದು ಮನವಿ ಮಾಡಲಾಗಿದೆ. ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಶೀಘ್ರದಲ್ಲೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಸಂಘ ತಿಳಿಸಿದೆ.









