(ನ್ಯೂಸ್ ಕಡಬ) newskadaba.com ಮೇ. 14. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.
ಈ ಕುರಿತು ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಸರ್ಕಾರವು ಈಗಾಗಲೇ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮಗಳನ್ನು ಕೈಗೊಂಡಿದ್ದು, ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಏರಿಕೆಯಾಗಿವೆ” ಎಂದರು.
ಭಾರತವು ಇಂಧನ ಹಾಗೂ ರಸಗೊಬ್ಬರಗಳ ಆಮದಿನ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಇದರ ಪರಿಣಾಮ ದೇಶದ ಮೇಲೂ ಕಾಣಿಸಿಕೊಳ್ಳಲು ಆರಂಭವಾಗಿದೆ. ಈ ಪರಿಸ್ಥಿತಿ ಇನ್ನೂ ಮುಂದುವರಿದರೆ ಸರ್ಕಾರ ಇಂಧನ ಬೆಲೆ ಏರಿಕೆಯ ಭಾರವನ್ನು ಸಾರ್ವಜನಿಕರ ಮೇಲೆ ಹಾಕಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಸಿದರು.










