(ನ್ಯೂಸ್ ಕಡಬ) newskadaba.com, ಜೂ.26 ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ₹250 ಕೋಟಿಗೂ ಅಧಿಕ ಮೊತ್ತದ ಹಗರಣ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಸಿ.ಟಿ. ರವಿ, ಈ ಪ್ರಕರಣವನ್ನು ತಕ್ಷಣವೇ ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಂಚನೆಯನ್ನು ರಾಜ್ಯ ಸರ್ಕಾರ ಪತ್ತೆಹಚ್ಚಿಲ್ಲ, ಬದಲಿಗೆ ಸಿಐಜಿ ಬಯಲಿಗೆಳೆದಿದೆ. ಒಂದೇ ಬ್ಯಾಂಕ್ ಖಾತೆಗೆ ಸಾವಿರಾರು ಫಲಾನುಭವಿಗಳ ಹಣ ವರ್ಗಾವಣೆಯಾಗಿರುವುದು ಸಾಮಾನ್ಯ ಸಂಗತಿಯಲ್ಲ. ಹೀಗಾಗಿ ರಾಜ್ಯ ಸರ್ಕಾರದ ಯಾವುದೇ ತನಿಖೆಯಿಂದಲೂ ಈ ಪ್ರಕರಣದಲ್ಲಿ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದರು.
ಈ ಭ್ರಷ್ಟಾಚಾರದ ಕುರಿತು ಮುಖ್ಯಮಂತ್ರಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳ ಮೌನ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಗೃಹಲಕ್ಷ್ಮಿಯರ ಹೆಸರಿನಲ್ಲಿ ಹಣ ಲೂಟಿ ಮಾಡಿರುವುದು ರಾಜ್ಯದ ಮಹಿಳೆಯರಿಗೆ ಮಾಡಿದ ದ್ರೋಹವಾಗಿದ್ದು, ನಕಲಿ ಖಾತೆಗಳ ಹಣದ ಪಾಲು ಆಳುವವರಿಗೂ ಸಿಕ್ಕಿದೆಯೇ ಎಂಬ ಸಂಶಯ ಮೂಡುತ್ತಿದೆ ಎಂದು ಅವರು ಆರೋಪಿಸಿದರು.









