(ನ್ಯೂಸ್ ಕಡಬ) newskadaba.com, ಜು.03 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸದ್ಯ ಮಳೆ ಕೊಂಚ ಕಡಿಮೆಯಾಗಿದ್ದರೂ, ಜುಲೈ 4 ರಿಂದ 10 ರವರೆಗೆ ಕರಾವಳಿಯುದ್ದಕ್ಕೂ ವ್ಯಾಪಕ ಹಾಗೂ ತೀವ್ರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತಗಳು ಕಟ್ಟೆಚ್ಚರ ವಹಿಸಿವೆ.ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಜಿಲ್ಲೆಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಜುಲೈ 3ರ ಶುಕ್ರವಾರದಂದು ರಜೆ ಘೋಷಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಸುರಿದ ಮಳೆಯಿಂದಾಗಿ ನೇತ್ರಾವತಿ, ಕುಮಾರಧಾರ ಹಾಗೂ ಗುರುಪುರ ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಸಾರ್ವಜನಿಕರು ನದಿ ತೀರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.









