(ನ್ಯೂಸ್ ಕಡಬ) newskadaba.com, ಜು.07: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮುಂಗಾರು ಮಳೆಯಿಂದಾಗಿ ಕೃಷ್ಣಾ ಮತ್ತು ಅದರ ಉಪನದಿಗಳು ಉಕ್ಕಿ ಹರಿಯುತ್ತಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸುಮಾರು 78 ಸಾವಿರ ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಕರದಗಾ-ಭೋಜ ಸೇರಿದಂತೆ ಏಳಕ್ಕೂ ಹೆಚ್ಚು ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ..
ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನದಿ ತೀರದ ಗ್ರಾಮಗಳ ಮೇಲೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ.ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಬೃಹತ್ ಮರ ಉರುಳಿ ಬೆಳಗಾವಿ-ಗೋವಾ ರಸ್ತೆ ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಬೆಳಗಾವಿ ನಗರದ ಭಾಗ್ಯನಗರದಲ್ಲಿ ಕಾರಿನ ಮೇಲೆ ಮರ ಬಿದ್ದು ವಾಹನ ಜಖಂಗೊಂಡಿದೆ.
ಚಿಕ್ಕೋಡಿ ತಾಲೂಕಿನ ವಡ್ರಾಳ ಗ್ರಾಮದಲ್ಲಿ ದನದ ಕೊಟ್ಟಿಗೆ ಕುಸಿದು ಗರ್ಭಿಣಿ ಎಮ್ಮೆಯೊಂದು ಮೃತಪಟ್ಟಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಆರಂಭದಲ್ಲಿ ಬತ್ತಿಹೋಗಿದ್ದ, ನಾಲ್ಕು ಜಿಲ್ಲೆಗಳ ಜೀವನಾಡಿಯಾದ ಮಲಪ್ರಭಾ ನದಿಗೆ ಭಾರಿ ಮಳೆಯಿಂದಾಗಿ ಮತ್ತೆ ಜೀವಕಳೆ ಬಂದಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚುವ ನಿರೀಕ್ಷೆಯಿದೆ.









