(ನ್ಯೂಸ್ ಕಡಬ) newskadaba.com, ಜು.10 : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ‘ಅಕ್ಷರ ದಾಸೋಹ’ ಯೋಜನೆಯಡಿ ನೀಡಲಾಗುವ ಮೊಟ್ಟೆ ಮತ್ತು ಬಾಳೆಹಣ್ಣಿನ ದರವನ್ನು ಪರಿಷ್ಕರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ 7.50 ರೂ.ನಿಂದ 8 ರೂ.ಗೆ ಏರಿಕೆಯಾಗಿದೆ. ಆದರೆ ಸರ್ಕಾರ ನೀಡುತ್ತಿರುವ ಅನುದಾನ ಕಡಿಮೆಯಿರುವುದರಿಂದ, ಪ್ರತಿ ವಿದ್ಯಾರ್ಥಿಗೆ ದಿನಕ್ಕೆ 2 ರಿಂದ 3 ರೂ.ಗಳಷ್ಟು ಹೆಚ್ಚುವರಿ ವೆಚ್ಚವನ್ನು ಮುಖ್ಯ ಶಿಕ್ಷಕರೇ ತಮ್ಮ ಸ್ವಂತ ಹಣದಿಂದ ಭರಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಇಲಾಖೆಯು ಸಮರ್ಪಕ ಅನುದಾನ ನೀಡದೆ ಯೋಜನೆಯ ಸಂಪೂರ್ಣ ಹೊಣೆಯನ್ನು ಶಿಕ್ಷಕರ ಮೇಲೆ ಹಾಕಿರುವುದು ಅವರಿಗೆ ಆರ್ಥಿಕ ಮತ್ತು ಮಾನಸಿಕ ಒತ್ತಡವನ್ನು ಉಂಟುಮಾಡಿದೆ.ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಕರ್ತವ್ಯವಾಗಿದ್ದು, ಈ ಆರ್ಥಿಕ ಹೊರೆಯನ್ನು ಶಿಕ್ಷಕರು ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ತಕ್ಷಣವೇ ಉನ್ನತ ಮಟ್ಟದಲ್ಲಿ ಚರ್ಚಿಸಿ ಮೊಟ್ಟೆಯ ದರವನ್ನು ಪರಿಷ್ಕರಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಪಿ.ಜಿ. ತಿಮ್ಮೇಗೌಡ ನೇತೃತ್ವದ ನಿಯೋಗ ಒತ್ತಾಯಿಸಿದೆ.









