(ನ್ಯೂಸ್ ಕಡಬ) newskadaba.com ಆ. 30. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನ ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಆಗಸ್ಟ್ 30 ಸಂಜೆ 6 ರಿಂದ ರಾತ್ರಿ 10ರ ವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ವಿದ್ಯುದ್ದೀಪಾಲಂಕಾರ ಆಯೋಜಿಸುತ್ತಿದೆ.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ. 2 ಸಾವಿರ ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ.
ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ. ಇದುವರೆಗೂ ಈ ಯೋಜನೆಯಡಿ 1.20 ಕೋಟಿ ಫಲಾನುಭವಿಗಳ ಖಾತೆಗೆ 76500 ಕೋಟಿಗೂ ಹೆಚ್ಚು ಹಣ ಪಾವತಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ








