(ನ್ಯೂಸ್ ಕಡಬ) newskadaba.com, ಸೆ. 12. ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಟಪಾಡಿ ಅಂಡರ್ಪಾಸ್ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಶನಿವಾರ ಮುಂಜಾನೆ ಮೀನು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಲಾರಿಯು ಉಡುಪಿಯಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಂಡರ್ಪಾಸ್ ನಿರ್ಮಾಣ ಕಾರ್ಯ ನಡೆಯುತ್ತಿದ್ದ ಸ್ಥಳದಲ್ಲಿ ಸಾರ್ವಜನಿಕ ಹಾಗೂ ವಾಹನ ಸಂಚಾರಕ್ಕಾಗಿ ಪರ್ಯಾಯ ರಸ್ತೆಯ ವ್ಯವಸ್ಥೆಯನ್ನು ಮಾಡಲಾಗಿತ್ತು.
ಆದರೆ, ಚಾಲಕನು ಕಾಮಗಾರಿ ಪ್ರದೇಶದ ಬಳಿ ಅಳವಡಿಸಲಾಗಿದ್ದ ಎಚ್ಚರಿಕೆ ಹಾಗೂ ಸೂಚನಾ ಫಲಕಗಳನ್ನು ಗಮನಿಸದೇ, ಪರ್ಯಾಯ ಮಾರ್ಗವನ್ನು ಬಳಸದೆ ನೇರವಾಗಿ ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಲಾರಿಯನ್ನು ಚಲಾಯಿಸಿದ್ದಾನೆ. ಪರಿಣಾಮವಾಗಿ, ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದಿದೆ.

ಘಟನೆಯಿಂದಾಗಿ ರಸ್ತೆಯಲ್ಲಿ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಕೆಲ ಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳೀಯರ ನೆರವಿನಿಂದ ತೆರವು ಕಾರ್ಯಾಚರಣೆ ನಡೆಸಲಾಗಿದೆ.




