ಮಂಗಳೂರು: ಅಕ್ರಮ ಪಿಸ್ತೂಲ್, ಮಾರಕಾಯುಧ ಪತ್ತೆ ► ಭೂಗತ ಪಾತಕಿಯ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಅಕ್ರಮವಾಗಿ ಪಿಸ್ತೂಲ್ ಹಾಗೂ ಇತರ ಮಾರಕಾಯುಧಗಳನ್ನು ಹೊಂದಿದ್ದ ಆರೋಪದಲ್ಲಿ ಭೂಗತ ಪಾತಕಿಯ ಸಹಚರನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರದಂದು ಬಂಧಿಸಿ ಪಿಸ್ತೂಲ್, ತಲವಾರು ಹಾಗೂ ಇತರ ಮಾರಕಾಯುಧಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಹೊಯಿಗೆ ಬಝಾರ್ ಪರಿಸರದ ಅನೀಷ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯೋರ್ವನು ಯಾವುದೋ ಕೃತ್ಯ ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್ ಹಾಗೂ ಸಜೀವ ಮದ್ದುಗುಂಡುಗಳು, ತಲವಾರುಗಳನ್ನು ಇಟ್ಟುಕೊಂಡಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರ, ಹೊಯಿಗೆ ಬಝಾರ್ ನಿವಾಸಿ ದಿ| ರಾಮಚಂದ್ರ ಸಾಲ್ಯಾನ್ ಎಂಬವರ ಪುತ್ರ ಹೇಮಂತ್ ಕುಮಾರ್ ಯಾನೆ ಹೇಮು(47) ಎಂಬಾತನನ್ನು ಬಂಧಿಸಿ ಆತನ ವಶದಲ್ಲಿದ್ದ ಪಿಸ್ತೂಲ್ ಹಾಗೂ 4 ಸಜೀವ ಮದ್ದುಗುಂಡುಗಳು, 2 ತಲವಾರುಗಳು, ಚೂರಿ, ಬೇಸ್ ಬಾಲ್ ಸ್ಟಿಕ್ ಹಾಗೂ ಎರಡು ಮೊಬೈಲ್ ಫೋನುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,12,750/- ಆಗಿರುತ್ತದೆ.

ಆರೋಪಿಯು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನಾಗಿದ್ದು, ಈತನು ಈ ಹಿಂದೆ ಮಂಗಳೂದು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕದ್ರಿ ಪಾರ್ಕ್ ಬಳಿ 2014 ನೇ ಇಸವಿಯಲ್ಲಿ ಅನೀಷ್ ಶೆಟ್ಟಿ ಎಂಬಾತನ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುತ್ತಾನೆ. ಈತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಪಿಸ್ತೂಲ್ ಹಾಗೂ ಇತರ ಮಾರಾಕಾಯುಧಗಳನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ ಟಿ. ಆರ್ ಸುರೇಶ್ ಐ.ಪಿ.ಎಸ್ ರವರ ನಿರ್ದೇಶನದಲ್ಲಿ ಪೊಲೀಸ್ ಉಪ ಆಯುಕ್ತರು( ಕಾ ಮತ್ತು ಸು) ರವರಾದ ಶ್ರೀ ಹನುಮಂತರಾಯ, ಐ.ಪಿ.ಎಸ್ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯರವರಾದ ಶ್ರೀಮತಿ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯನ್ನು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

error: Content is protected !!

Join the Group

Join WhatsApp Group